ಹಿರಿಯೂರು : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಹೀಗಾಗಿ ಎಲ್ಲ ಪಕ್ಷಗಳು ತಂತ್ರ- ಪ್ರತಿ ತಂತ್ರ ಹೆಣೆಯುತ್ತಿವೆ. ಈ ಮಧ್ಯೆ ರಾಷ್ಟ್ರೀಯ ಪಕ್ಷಗಳ ಸಿಎಂ ಅಭ್ಯರ್ಥಿ ಯಾರು ಎಂಬ ಕುರಿತು ಈಗಾಗಲೇ ಚರ್ಚೆಯಾಗುತ್ತದೆ. ಸದ್ಯ ಬಿಜೆಪಿ ಪಾಳಯದಲ್ಲಿ ಈ ಚರ್ಚೆ ಜೋರಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಗೆದ್ದು, ಅಧಿಕಾರಕ್ಕೆ ಏರಿದ ನಂತರವೇ ಸಿಎಂ ಅಭ್ಯರ್ಥಿ ಯಾರು ಎಂಬುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ರೋಡ್ ಶೋನಲ್ಲಿ ಭಾಗವಹಿಸಲು ಅವರು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ನಿರೀಕ್ಷೆ ಮೀರಿ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು 140ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ಹೀಗಾಗಿ ಗೆದ್ದ ಬಳಿಕವಷ್ಟೇ ಸಿಎಂ ಅಭ್ಯರ್ಥಿ ಯಾರು ಎಂಬುವುದನ್ನು ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ನಾನೇ ಸಿಎಂ ಎಂಬುದಾಗಿ ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವಂತೆ ವರ್ತಿಸುತ್ತಿದ್ದಾರೆ. ಇದರಲ್ಲಿ ಅರ್ಥವೇ ಇಲ್ಲ. ಹೀಗಾಗಿ ಕಾಂಗ್ರೆಸ್ ಈ ಬಾರಿ ಸೋಲು ಕಾಣಲಿದೆ ಎಂದು ಹೇಳಿದ್ದಾರೆ.