Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಲಿಟ್ಟಿದ್ದಾರೆ. ನಗರದ ನೈಸ್ ರೋಡ್ ಜಂಕ್ಷನ್ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ರೋಡ್ ಶೋ ನಡೆಯಿತು.

ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದ್ದವು. ಪ್ರಧಾನಿಯು ಜನರತ್ತ ಕೈಬೀಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿತ್ತು. ಹೂಮಳೆ ಸುರಿಸಿ ಸಂಭ್ರಮಿಸಿದರು. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿತ್ತು. ಮೋದಿ ರೋಡ್ ಶೋ ಭದ್ರತೆಗೆ ಬೆಂಗಳೂರು 7 ಸುತ್ತಿನ ಕೋಟೆಯಂತಾಗಿತ್ತು. ರಸ್ತೆಗೆ ಬ್ಯಾರಿಕೇಡ್ಗಳನ್ನು ಹಾಕಿ, ಅಂಗಡಿ-ಮುಂಗಟ್ಟುಗಳನ್ನು ಕ್ಲೋಸ್ ಮಾಡಿ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಬೀದರ್, ವಿಜಯಪುರ, ಬೆಳಗಾವಿ ಇಂದು ಮೋದಿ ಪ್ರಚಾರವನ್ನು ನಡೆಸಿ ಬೆಂಗಳೂರಿಗೆ ಆಗಮಿಸಿದ್ದರು. ಮೋದಿಯನ್ನು ನೋಡಲು ಸಾವಿರಾರು ಕಾರ್ಯಕರ್ತರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿ “ಮೋದಿ ಮೋದಿ” ಎಂದು ಜಯಘೋಷ ಹಾಕಿದರು.

