Dharwad : ರಾಜ್ಯ ವಿಧಾನಸಭಾ ಚುನಾವಣೆಯ (Election) ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರೊಬ್ಬರಿಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿರುವ ಘಟನೆ (Dharwad) ಜಿಲ್ಲೆಯಲ್ಲಿ ನಡೆದಿದೆ.
ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಸಾವನ್ನಪ್ಪಿರುವ ಶಿಕ್ಷಕ ಎನ್ನಲಾಗಿದೆ. ಜಿಲ್ಲೆಯ ಕುಂದಗೋಳ ಪಟ್ಟಣದ ಆರ್ಯ ಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಪ್ಪ, ವಿಧಾನಸಭಾ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದರು.
ನಗರದಲ್ಲಿನ ಜೆಎಸ್ಸೆಸ್ ಕಾಲೇಜಿನಲ್ಲಿ ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿದ್ದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿತ್ತು. ಈ ತರಬೇತಿಯಲ್ಲಿ ಶಿಕ್ಷಕ ಮಲ್ಲಪ್ಪ ಸೋನಾರ ಭಾಗವಹಿಸಿ ತರಬೇತಿ ಪಡೆದು, ಮೆಟ್ಟಿಲು ಇಳಿದು ಮನೆಗೆ ಹೋಗುವ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶಿಕ್ಷಕರ ಆಕಸ್ಮಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಎಲ್ಲ ನೆರವು ತಲುಪಿಸಲಾಗುವುದು ಎಂದು ಹೇಳಿದ್ದಾರೆ.