ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿಧ್ದತೆಗಳು ನಡೆದಿವೆ. ಇನ್ನು ಪೊಲೀಸ್ ಇಲಾಖೆಯಂತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ರಾಜ್ಯದಲ್ಲಿ ಬರೋಬ್ಬರಿ 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

ಮೇ 10ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸುಸೂತ್ರವಾಗಿ ಮತದಾನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಈಗಾಗಲೇ ಒಟ್ಟು 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಭದ್ರತಾ ಕಾರ್ಯದಲ್ಲಿ 304 ಡಿವೈಎಸ್ ಪಿ, 991 ಪೊಲೀಸ್ ಇನ್ಸ್ ಪೆಕ್ಟರ್, 2610 ಪಿಎಸ್ ಐ, 5803 ಎಸ್ ಐ ಸೇರಿದಂತೆ 84 ಸಾವಿರ ಸಿಬ್ಬಂಧಿ ನಿಯೋಜನೆ ಮಾಡಲಾಗಿದೆ. 8.5 ಸಾವಿರ ಹೋಂಗಾರ್ಡ್ ಗಳನ್ನು, 650 ಸಿಆರ್ ಪಿಎಫ್ ತುಕಡಿ, ಕೆಎಸ್ ಆರ್ ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ.
ಹೆಚ್ಚಿನ ಭದ್ರತೆಗಾಗಿ ಬೇರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಗೋವಾದಿಂದಲೂ ಪೊಲೀಸ್ ಸಿಬ್ಬಂಧಿಗಳನ್ನು ಕರೆಸಿಕೊಳ್ಳಲಾಗಿದೆ.
ಸೂಕ್ಷ್ಮ ಮತಗಟ್ಟೆ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ವರುಣಾ, ಚಾಮುಂಡೇಶ್ವರಿ, ಹಾಸನ, ಚನ್ನಪಟ್ಟಣ ಈ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. 11617 ಮತಗಟ್ಟೆಗಳು ಹಾಗೂ ಅತೀ ಸೂಕ್ಶ್ಮ ಮತಗಟ್ಟೆಗಳಾಗಿ ಪರಿಗಣಿಸಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.