ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ ಪಟ್ಟಿ ಸಿದ್ಧವಾಗಿದ್ದು, ಈ ಕುರಿತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮಾತನಾಡಿದ್ದಾರೆ.ಕಾಂಗ್ರೆಸ್ ನ ಮೊದಲ ಪಟ್ಟಿಯನ್ನು ಯುಗಾದಿಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 125 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಲ್ಲದೇ ಮಾಜಿ ಸಿಎಂ ಸ್ಪರ್ಧೆ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ನಡುವೆ ನಡೆದ ಮಾತುಕತೆ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಬಾದಾಮಿ, ಕೋಲಾರ ಹಾಗೂ ವರುಣ ಕ್ಷೇತ್ರದಲ್ಲಿ ಎಲ್ಲಿಯೇ ನಿಂತರೂ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.ಚುನಾವಣೆ ಸಂದರ್ಭದಲ್ಲಿ ಖಾಸಗಿ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಫೋನ್ ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರಿಗಳು ಆಮಿಷಕ್ಕೊಳಗಾಗಿ ಫೋನ್ ಸಿಡಿಆರ್ ಕೊಡುವವರು ಕೂಡ ಇರುತ್ತಾರೆ. ಒಂದು ವೇಳೆ ಹಾಗೇನಾದರೂ ಆದರೆ, ಅದಕ್ಕೆ ಸರ್ಕಾರವೇ ಜವಾಬ್ದಾರಿ ಎಂದು ಹೇಳಿದ್ದಾರೆ