Bangalore: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿ ವಾಗ್ದಾಳಿ ನಡೆಸಿರುವ ಅವರು, ವ್ಹಾರೆ ವ್ಹಾ ಅಮಿತ್ ಶಾ ಜೀ, ದೆಹಲಿಯಲ್ಲಿ ಕೂತು ರಾಜ್ಯಗಳನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಕರ್ನಾಟಕವನ್ನು ನರೇಂದ್ರ ಮೋದಿ ಅವರ ಕೈಗೆ ಕೊಡುವ ಚುನಾವಣೆಯಿದು ಎಂದು ಅಮಿತ್ ಶಾ ಹೇಳಿದ್ದ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕರ್ನಾಟಕದ ಭವಿಷ್ಯವನ್ನು ನರೇಂದ್ರ ಮೋದಿ ಅವರ ಕೈಯಲ್ಲಿ ಕೊಡುವ ಚುನಾವಣೆ ಎಂಬ ಸತ್ಯವನ್ನೇ ಹೇಳಿದ್ದೀರಿ. ಧನ್ಯವಾದಗಳು. ಇದೆಂತ ಅವಮಾನ ಕನ್ನಡಿಗರಿಗೆ. ಕರ್ನಾಟಕದ ಭವಿಷ್ಯವನ್ನು ನೋಡಿಕೊಳ್ಳಲು ಒಬ್ಬ ಕನ್ನಡಿಗನೂ ಇಲ್ಲದಷ್ಟು ನಿಮ್ಮ ಪಕ್ಷ ದಿವಾಳಿಯಾಗಿದೆಯೇ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಮತದಾರರು ಆಯ್ಕೆ ಮಾಡುವುದು ತಮ್ಮ ಸೇವೆ ಮಾಡುವ ಪ್ರತಿನಿಧಿಗಳನ್ನೆ ಹೊರತು, ದೆಹಲಿ ದೊರೆಯ ಸೇವೆ ಮಾಡುವ ಗುಲಾಮರನ್ನಲ್ಲ. ಅಮಿತ್ ಶಾ ಅವರೇ, ಪ್ರಜಾಪ್ರಭುತ್ವ ವ್ಯವಸ್ಥೆಗಷ್ಟೇ ಅಲ್ಲ ಸ್ವಾಭಿಮಾನಿ ಕನ್ನಡಿಗರಿಗೂ ನೀವು ಅವಮಾನ ಮಾಡಿದ್ದೀರಿ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬ್ಯಾಂಕುಗಳು, ಬಂದರು, ವಿಮಾನ ನಿಲ್ದಾಣಗಳನ್ನು ಗುಜರಾತಿ ವ್ಯಾಪಾರಿಗಳಿಗೆ ಮಾರಿಬಿಟ್ಟಿರಿ, ನಮ್ಮ ಹೆಮ್ಮೆಯ ನಂದಿನಿಯನ್ನೂ ಕಬಳಿಸಲು ಹೊಂಚು ಹಾಕುತ್ತಿದ್ದೀರಿ. ಈಗ ಇಡೀ ಕರ್ನಾಟಕವನ್ನೇ ಖರೀದಿಸಲು ಹೊರಟಿದ್ದೀರಾ? ಪ್ರಶ್ನಿಸಿದ ಅವರು, ನಿಮ್ಮ ದುರಾಹಂಕಾರದ ಮಾತುಗಳಿಗೆ ರಾಜ್ಯದ ಸ್ವಾಭಿಮಾನಿ ಕನ್ನಡಿಗರು ಚುನಾವಣೆಯಲ್ಲಿಯೇ ಉತ್ತರ ನೀಡಲಿದ್ದಾರೆ ಎಂದು ಗುಡುಗಿದ್ದಾರೆ.

ಕನ್ನಡದ ಕತ್ತು ಹಿಸುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.