Bangalore : ನೂತನ ಸಿಎಂ ಎಂದು ಸಿದ್ದರಾಮಯ್ಯ (Siddaramaiah) ಹೆಸರು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಿಎಲ್ಪಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವರು ಇದ್ದರು.
ಸಿಎಂ ಗಾದಿಗಾಗಿ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಗುದ್ದಾಟ ಶುರುವಾಗಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದರು. ಕೆಲವು ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು.
ಸಿದ್ದರಾಮಯ್ಯ ಸಿಎಂ ಎಂಬುವುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಮೇ 20ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಸಿಎಂಗಳನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.