ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞ ವೈದ್ಯರು, ನರ್ಸ್ ಸೇರಿದಂತೆ ರಾಜ್ಯದಲ್ಲಿ ಬರೊಬ್ಬರಿ 13,622 ಹುದ್ದೆಗಳು ಖಾಲಿ ಇವೆ. ಹೀಗಾಗಿ ಲಕ್ಷಾಂತರ ಜನ ರೋಗಿಗಳು ಪರದಾಡುವಂತಾಗಿದೆ.
ರಾಜ್ಯದಲ್ಲಿನ ಒಟ್ಟು 911 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ. ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಮುಂದೆ ಸರದಿ ಸಾಲಿನಲ್ಲಿ ಚಿಕಿತ್ಸೆಗಾಗಿ ತಾಸುಗಟ್ಟಲೆ ನಿಂತು ಹೈರಾಣಾಗುತ್ತಿದ್ದಾರೆ. ಹೀಗಾಗಿ ಎಲ್ಲೆಡೆ ವೈದ್ಯಕೀಯ ಸಿಬ್ಬಂದಿ ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಲಾಗುತ್ತಿದೆ.
ಸದ್ಯ ಮಂಜೂರಾಗಿರುವ 38,500 ಹುದ್ದೆಗಳ ಪೈಕಿ 24,878 ಹುದ್ದೆ ಭರ್ತಿಯಾಗಿವೆ. 13,622 ಹುದ್ದೆ (ಶೇ.36) ಇನ್ನೂ ಖಾಲಿ ಉಳಿದಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಅಲ್ಲದೇ, ರಾಜ್ಯದಲ್ಲಿನ ಶೇ. 78ರಷ್ಟು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ. ನರ್ಸ್ಗಳು ಹಾಗೂ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ.
ರಾಜ್ಯದ ಜನ ಸಂಖ್ಯೆಗೆ ಹೋಲಿಸಿದರೆ 60 ಸಾವಿರಕ್ಕೂ ಅಧಿಕ ವೈದ್ಯರ ನೇಮಕವಾಗಬೇಕಿದೆ. ಸದ್ 12 ಸಾವಿರ ಜನರಿಗೆ ಸರಾಸರಿ ಒಬ್ಬರು ವೈದ್ಯರಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚಿನ ಸಿಬ್ಬದಿಯ ಕೊರತೆ ಇದೆ. ಸರ್ಕಾರ ಕೂಡಲೇ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಭರ್ತಿ ಮಾಡಿಕೊಂಡು ಬಡ ಜನರಿಗೆ ಅನುಕೂಲ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.